ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ.
ಅದರಂತೆ ಬೆಂಗಳೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ,
ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕಳೆದೊಂದು ವಾರದಿಂದ ಬೆಂಗಳೂರು ಹಾಗೂ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿತ್ತು. ಮಳೆಯ ಜೊತೆ ಚಳಿಯೂ ಇತ್ತು. ಆದರೆ, ಗುರುವಾರದ ಬಳಿಕ ಮಳೆಯಾಗಿಲ್ಲ. ಚುಮು ಚುಮು ಚಳಿಯ ವಾತಾವರಣ ಮುಂದುವರೆದಿದೆ. ಮುಂಜಾನೆ ವೇಳೆ ಇಬ್ಬನಿಯೂ ಇದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 2 ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.