ನವದೆಹಲಿ: ಬಿಜೆಪಿ ಮತ್ತು ಆರ್ಎಸ್ಎಸ್ ತಮ್ಮ ಆಕ್ರಮಣಕಾರಿ ದಾಳಿಗಳ ಮೂಲಕ ಕಾಂಗ್ರೆಸ್ ತನ್ನ ಸಿದ್ಧಾಂತವನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತಿವೆ. ಆದ್ದರಿಂದ ಬಿಜೆಪಿ, ಆರ್ಎಸ್ಎಸ್ ನನ್ನ ಗುರು ಎಂದು ಪರಿಗಣಿಸುತ್ತೇನೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ದೆಹಲಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಹಾಗೂ ಆರ್ಎಸ್ಎಸ್ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಬಿಜೆಪಿ ಮತ್ತು ಆರ್ಎಸ್ಸ್ ನಮ್ಮ ಮೇಲೆ ಆಕ್ರಮಣಕಾರಿ ದಾಳಿ ಮಾಡಬೇಕೆಂದು ನಾನು ಬಯಸುತ್ತೇನೆ. ಏಕೆಂದರೆ ಅವರ ದಾಳಿಯಿಂದ ಕಾಂಗ್ರೆಸ್ ಪಕ್ಷ ತನ್ನ ಸಿದ್ಧಾಂತ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ನಾನು ಅವರನ್ನು ನನ್ನ ಗುರು ಎಂದು ಪರಿಗಣಿಸುತ್ತೇನೆ. ಅವರು ನನಗೆ ದಾರಿ ತೋರಿಸುತ್ತಿದ್ದಾರೆ. ಜೊತೆಗೆ ಏನು ಮಾಡಬಾರದು ಅನ್ನೋದರ ಬಗ್ಗೆಯೂ ತರಬೇತಿ ನೀಡುತ್ತಿದ್ದಾರೆ ಎಂದು ಕುಟಕುಕಿದರು.
ಭಾರತ್ ಜೋಡೋ ಯಾತ್ರೆಯಿಂದ ಕೋವಿಡ್ ನಿಯಮ ಉಲ್ಲಂಘನೆಯಾಗುತ್ತದೆ, ಕೊರೊನಾ ಸೋಂಕು ಹರಡುತ್ತದೆ ಎಂದು ಬಿಜೆಪಿ ಸರ್ಕಾರ ಹೇಳುತ್ತದೆ. ಆದರೆ ಬಿಜೆಪಿ ನಡೆಸುವ ರೋಡ್ ಶೋಗಳು, ಯಾತ್ರೆಗಳಿಂದ ಕೊರೊನಾ ಹರಡೋದಿಲ್ವಾ ಎಂದು ಪ್ರಶ್ನಿಸಿದರು.